ಡಿ.29ರಂದು ವಿಶ್ವ ಮಾನವ ಕುವೆಂಪು ಜಯಂತ್ಯುತ್ಸವ
ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ
ಯಾದಗಿರಿಃ ಜಿಲ್ಲಾಡಳಿತದ ವತಿಯಿಂದ ವಿಶ್ವ ಮಾನವ ರಾಷ್ಟ್ರಕವಿ ಕುವೆಂಪು ರವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಡಿ. 29ರಂದು ಬೆಳಗ್ಗೆ 11 ಗಂಟೆಗೆ ಯಾದಗಿರಿ ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ವಿಶ್ವ ಮಾನವ (ರಾಷ್ಟ್ರಕವಿ ಕುವೆಂಪು ರವರ ಜಯಂತ್ಯುತ್ಸವ) ದಿನಾಚರಣೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶ್ವ ಮಾನವ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರಕವಿ ಕುವೆಂಪು ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುವುದು. ಅದರಂತೆ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ ಶಾಲಾ-ಕಾಲೇಜುಗಳಲ್ಲಿಯೂ ಸಹ ಶ್ರದ್ಧಾ, ಭಕ್ತಿಯೊಂದಿಗೆ ವಿಶ್ವ ಮಾನವ ದಿನವನ್ನು ಕಡ್ಡಾಯವಾಗಿ ಆಚರಿಸಬೇಕು.
ಅಲ್ಲದೆ ತಹಶೀಲ್ದಾರರು ತಾಲ್ಲೂಕು ಮಟ್ಟದಲ್ಲಿ ಸದರಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು. ಜಯಂತಿ ನಿಮಿತ್ತ ರಾಷ್ಟ್ರಕವಿ ಕುವೆಂಪು ಅವರ ಜೀವನ ಚರಿತ್ರೆಯ ಕುರಿತು ತಾಲ್ಲೂಕು ಮಟ್ಟದಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಪ್ರತಿ ತಾಲ್ಲೂಕಿನಲ್ಲಿ ಆಯ್ಕೆಗೊಂಡ ಇಬ್ಬರಂತೆ ಒಟ್ಟು 6 ವಿದ್ಯಾರ್ಥಿಗಳನ್ನು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಕರೆತಬೇಕು.
ಅದೇ ರೀತಿ ಯಾದಗಿರಿ ತಾಲ್ಲೂಕು ಮಟ್ಟದಲ್ಲಿಯೂ ಕೂಡ ಕುವೆಂಪು ಜೀವನ ಚರಿತ್ರೆಯ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ಆಯ್ಕೆಗೊಂಡ 3 ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆತರಬೇಕು. ಅಲ್ಲದೇ, ಕಾರ್ಯಕ್ರಮದಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಪ್ರಬಂಧ ಸ್ಪರ್ಧೆಯಲ್ಲಿ ಆಯ್ಕೆಯಾದ 9 ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಕುವೆಂಪುರವರ ಜೀವನಾಧಾರಿತ ಪುಸ್ತಕಗಳನ್ನು ನೀಡುವ ವ್ಯವಸ್ಥೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರಿಗೆ ಸೂಚಿಸಿದರು.
ಯಾದಗಿರಿ ನಗರದ ರಸ್ತೆ ಸ್ವಚ್ಛತೆ, ಜಯಂತಿ ಕುರಿತಾಗಿ ಡಿ.27 ಮತ್ತು 28ರಂದು ನಗರದಾದ್ಯಂತ ಆಟೋರಿಕ್ಷಾದಲ್ಲಿ ಮೈಕ್ ಮೂಲಕ ಪ್ರಚಾರ ಮಾಡಲು ನಗರಸಭೆ ಕ್ರಮ ಕೈಗೊಳ್ಳಬೇಕು. ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಮಾಜದ ಮುಖಂಡರು, ವಿದ್ಯಾರ್ಥಿಗಳು, ಗಣ್ಯ ವ್ಯಕ್ತಿಗಳು ಹಾಗೂ ಅಧಿಕಾರಿಗಳಿಗೆ ಪಲಾವು ರೈಸ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಅಂಕಿತ ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಯಾದಗಿರಿ ತಹಶೀಲ್ದಾರ್ ಅವರನ್ನು ನೇಮಕ ಮಾಡಲಾಯಿತು. ಜಯಂತಿ ಕಾರ್ಯಕ್ರಮದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ರಘುವೀರಸಿಂಗ್ ಠಾಕೂರ್ ಅವರು ಸಭೆಯ ನಡಾವಳಿ ಓದಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ವಿಶ್ವನಾಥ, ವಿಕ್ರಂಸಿಂಗ್ ಠಾಕೂರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.