ಇನ್ನೂ ಕೆಲ ಸಚಿವರ ಮನೆ ಮೇಲೆ ಐಟಿ ದಾಳಿ ಸಾಧ್ಯತೆ – ಬಿ.ಎಸ್.ಯಡಿಯೂರಪ್ಪ
ಬಾಗಲಕೋಟೆ : ರಾಜ್ಯ ಸರ್ಕಾರದ ಇನ್ನೂ ಕೆಲ ಸಚಿವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆಯುವ ಸಾಧ್ಯತೆ ಇದೆ. ಹೀಗಾಗಿ, ಭಯ ಭೀತಿಗೊಳಗಾಗಿರುವ ಸಿಎಂ ಸಿದ್ಧರಾಮಯ್ಯ ಇಲ್ಲದ ತಂತ್ರ ಹೂಡಲು ಯತ್ನಿಸುತ್ತಿದ್ದಾರೆ. ಆದಾಯ ತೆರಿಗೆ ಅಧಿಕಾರಿಗಳ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿ ನಡೆಸುವ ತಂತ್ರ ರೂಪಿಸಿ ಬೆದರಿಕೆ ತಂತ್ರಕ್ಕೆ ಮುಂದಾಗಿದ್ದಾರೆ. ಆ ಮೂಲಕ ರಾಜ್ಯದಲ್ಲಿ ಅಪಹಾಸ್ಯಕ್ಕೆ ಈಡಾಗಿದ್ದಾರೆ. ಭ್ರಷ್ಟಾಚಾರ ನಿಗ್ರಹ ದಳ ಈಗ ಸಿದ್ಧರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳ ರಕ್ಷಣಾ ದಳ ಆಗುತ್ತಿದೆ ಎಂದು ಮಾಜಿ ಸಿಎಂ, ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದರು.
ಶಿಕಾರಿಪುರದಿಂದಲೇ ಸ್ಪರ್ಧಿಸುತ್ತೇನೆ – ಬಿಎಸ್ ವೈ ಸ್ಪಷ್ಟನೆ
ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಶಿಕಾರಿಪುರದಿಂದಲೇ ಮುಂದಿನ ಚುನಾವಣೆ ಎದುರಿಸುತ್ತೇನೆಂದು ಸ್ಪಷ್ಟಪಡಿಸಿದರು. ತೇರದಾಳ ಕ್ಷೇತ್ರದಲ್ಲಿ ಬಾಗಲಕೋಟೆಯ ಬಿಜೆಪಿ ಜಿಲ್ಲಾದ್ಯಕ್ಷ ಸಿದ್ದು ಸವದಿ ಅವರು ಸ್ಪರ್ಧಿಸುವುದು ಖಚಿತವಾಗಿದೆ. ಉತ್ತರ ಕರ್ನಾಟಕದಿಂದ ಸ್ಪರ್ಧಿಸುವಂತೆ ನನಗೆ ಹೈಕಮಾಂಡ್ ಸೂಚಿಸಿದ್ದು ನಿಜ. ತೇರದಾಳ ಕ್ಷೇತ್ರದಿಂದ ನಾನು ಸ್ಪರ್ಧಿಸುವಂತೆ ಈ ಭಾಗದ ಜನರೂ ಒತ್ತಾಯಿಸಿದ್ದರು. ಆದರೆ, ಶಿಕಾರಿಪುರದ ಜನರ ಒತ್ತಾಯದ ಮೇರೆಗೆ ಮೂಲ ಕ್ಷೇತ್ರದಿಂದಲೇ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈ ಬಗ್ಗೆ ಹೈಕಮಾಂಡ್ ಮನವೊಲಿಸುತ್ತೇನೆ ಎಂದು ತಿಳಿಸಿದರು.