ಭ್ರಷ್ಟಾಚಾರದ ದೊರೆ ಸಿಎಂ ಸಿದ್ಧರಾಮಯ್ಯ – ಕೆ.ಎಸ್.ಈಶ್ವರಪ್ಪ ವಾಗ್ದಾಳಿ
ಬೀದರ್ : ಅಶೋಕ ಖೇಣಿ ನೈಸ್ ರಸ್ತೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಿದ್ಧರಾಮಯ್ಯ ಸರ್ಕಾರದ ಸಚಿವ ಜಯಚಂದ್ರ ಅವರೇ ವರದಿ ಕೊಟ್ಟಿದ್ದಾರೆ. ಆದರೆ, ಸಿದ್ಧಾರಮಯ್ಯನವರು ಅಶೋಕ ಖೇಣಿ ಅವರನ್ನೇ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಿಎಂ ಸಿದ್ಧರಾಮಯ್ಯ ಭ್ರಷ್ಟಾಚಾರದ ದೊರೆ ಎಂಬುದಕ್ಕೆ ಖೇಣಿ ಕಾಂಗ್ರೆಸ್ ಸೇರ್ಪಡೆಯೇ ಜ್ವಲಂತ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ಬೀದರ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ ರಾಜ್ಯದಲ್ಲಿ ಕೊಲೆ , ಸುಲಿಗೆ , ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚಿವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಕಾಂಗ್ರೆಸ್ ಮುಖಂಡರೇ ಗುಂಡಾಗಿರಿಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ನಾಯಕರೇ ಬಿಬಿಎಂಪಿ ಕಚೇರಿಗೆ ಬೆಂಕಿ ಹಚ್ಚಲು ಹೋಗಿದ್ದಾರೆ. ಹೀಗಾಗಿ, ರಾಜ್ಯದಲ್ಲಿ ರಕ್ಷಣೆಯಿಲ್ಲದಾಗಿದ್ದು ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆದು ರಕ್ಷಣೆ ನೀಡುವ ಬಿಜೆಪಿಗೆ ಅಧಿಕಾರ ನೀಡಿ ಎಂದು ಸುರಕ್ಷಾ ಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.