ಕಲಬುರಗಿ: ಸಾಧನಾ ಸಮಾವೇಶದಲ್ಲಿ ಸಚಿವ ಶರಣಪ್ರಕಾಶ ಪಾಟೀಲ್ ಯಡವಟ್ಟು, ಕಮಲದ ಕಡೆ ಸಿಎಂ ವಾಗ್ಬಾಣ
ಕಲಬುರಗಿ: ಜಿಲ್ಲೆಯ ಜೇವರಗಿ ತಾಲೂಕಿನ ಯಡ್ರಾಮಿ ಪಟ್ಟಣದಲ್ಲಿ ನಡೆದ ಸಾಧನಾ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆ ನೀಡಿದರು. ಸಚಿವ ಡಾ.ಶರಣಪ್ರಕಾಶ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಭಾಷಣ ಆರಂಭಿಸಿದ ಸಚಿವ ಶರಣಪ್ರಕಾಶ್ ಪಾಟೀಲ್ ಬಿಜೆಪಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರುವ ಭರದಲ್ಲಿ ಸಿದ್ಧರಾಮಯ್ಯ ಅವರೇ ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿ ಬಂದವರು ನೀವು ಅನ್ನುವ ಮೂಲಕ ಯಡವಟ್ಟು ಮಾಡಿದರು. ತಕ್ಷಣಕ್ಕೆ ಎಚ್ಚೆತ್ತುಕೊಂಡ ಸಚಿವ ಪಾಟೀಲ್ ಅವರು ಯಡಿಯೂರಪ್ಪ ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದವರು ಎಂದರು.
ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಭಾಷಣದುದ್ದಕ್ಕೂ ಬಿಜೆಪಿ ವಿರುದ್ಧ ಹರಿಹಾಯ್ದರು. ಬಿಜೆಪಿ ನಾಯಕರು ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಾರೆ. ಸತ್ತ ಹೆಣದ ಮೇಲೂ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಅಮಾನವೀಯ ರಾಜಕಾರಣ ಮಾಡುತ್ತಾರೆ. ಹೀಗಾಗಿ, ರಾಜ್ಯದ ಜನ ಪರಿವರ್ತನೆ ಆಗಬೇಕಿಲ್ಲ. ಮೊದಲು ಬಿಜೆಪಿ ನಾಯಕರು ಮನ ಪರಿವರ್ತನೆ ಮಾಡಿಕೊಳ್ಳಬೇಕಿದೆ. ಆಮೇಲೆ ಬೇಕಾದರೆ ಬಿಜೆಪಿಯವರು ರಾಜ್ಯದಲ್ಲಿ ಪರಿವರ್ತನಾ ಯಾತ್ರೆ ಮಾಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು.