ಪ್ರಮುಖ ಸುದ್ದಿ

ಗುರಿ ಸಾಧನೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಸಲಹೆ ಪಡೆದ ಜಿಲ್ಲಾಧಿಕಾರಿ

ನ್ಯಾಯಬೆಲೆ ಅಂಗಡಿಗಳಿಗೆ ಬಯೋ ಮೆಟ್ರಿಕ್ ವ್ಯವಸ್ಥೆ ಕಲ್ಪಿಸಿಃ ಡಿಸಿ ಜೆ.ಮಂಜುನಾಥ

ಯಾದಗಿರಿಃ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಬಯೋ ಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಪಾಯಿಂಟ್ ಆಫ್ ಸೇಲ್ಸ್ ಪಡಿತರ ವಿತರಣೆಗೆ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಜೆ.ಮಂಜುನಾಥ ಜಿಲ್ಲೆಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಸಕ್ತ 2018 ಹೊಸ ವರ್ಷದಲ್ಲಿ ಸಾಧಿಸಬೇಕಾದ ಗುರಿ ಮತ್ತು ಕಾರ್ಯಕ್ರಮಗಳ ಬಗ್ಗೆ ಸ್ವತಃ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಸಲಹೆ ಮತ್ತು ಅಭಿಪ್ರಾಯಗಳ ಪಡೆದು ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 399 ನ್ಯಾಯಬೆಲೆ ಅಂಗಡಿಗಳಿದ್ದು, ಈ ಪೈಕಿ 263 ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ. ಉಳಿದ 136 ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ಮೆಟ್ರಿಕ್ ಅಳವಡಿಸಲು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗಳ ಪರವಾನಿಗೆದಾರರ ಸಭೆ ಕರೆಯಬೇಕೆಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ನ್ಯಾಯಬೆಲೆ ಅಂಗಡಿಗಳ ನಡುವೆ ಮೂರು ಕಿ.ಮೀ.ಗಿಂತ ಹೆಚ್ಚು ದೂರದ ಅಂತರ ಇರಬಾರದು. ಇಂತಹ ನ್ಯಾಯಬೆಲೆ ಅಂಗಡಿಗಳನ್ನು ಗುರುತಿಸಿ ಗ್ರಾಮೀಣ ಜನರು ಸುಲಭವಾಗಿ ಪಡಿತರ ಧಾನ್ಯಗಳನ್ನು ಕೊಂಡೊಯ್ಯಲು ಅನುಕೂಲ ಮಾಡಿಕೊಡುವ ಬಗ್ಗೆ ವರದಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸಲಹೆ ನೀಡಿದರು.

ಕೃಷಿ ಇಲಾಖೆಯೂ ರೈತರಿಗೆ ರಸಗೊಬ್ಬರವನ್ನು ಕಡ್ಡಾಯವಾಗಿ ಪಿಒಎಸ್ (ಪಾಯಿಂಟ್ ಆಫ್ ಸೇಲ್ಸ್) ಮೂಲಕ ವಿತರಣೆ ಮಾಡಬೇಕು. ಪಿಒಎಸ್ ಅಳವಡಿಸದಂತಹ ರಸಗೊಬ್ಬರ ಅಂಗಡಿಗಳನ್ನು ಗುರುತಿಸಿ ಅವುಗಳ ಪರವಾನಿಗೆಯನ್ನು ರದ್ದುಗೊಳಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.
ಸರ್ಕಾರ ವಿವಿಧ ಯೋಜನೆಗಳ ಲಾಭ ಪಡೆಯಲು ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಇನ್ನೂ ಸರಿಯಾಗಿ ಫಲಾನುಭವಿಗಳ ಆಧಾರ್ ಜೋಡಣೆ ಮಾಡಿಸಿರುವುದಿಲ್ಲ. ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಅವರು ತಿಳಿಸಿದರು.

ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸೂಕ್ತ ನಿವೇಶನ ಗುರುತಿಸಿ ಹಸ್ತಾಂತರಿಸಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದ ಅವರು, ಕಟ್ಟಡ ಮುಂತಾದ ಮೂಲಭೂತ ಸೌಕರ್ಯಗಳ ಕಲ್ಪಿಸುವ ಕಾಮಗಾರಿಗಳಿಗೆ ಸೂಕ್ತ ಮರಳು ಸರಬರಾಜು ಮಾಡಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯಲ್ಲಿ 65 ಹಿಂದುಳಿದ ವರ್ಗಗಳ ಹಾಸ್ಟೆಲ್‍ಗಳು ಇದ್ದು, ಅವುಗಳ ಆವರಣದಲ್ಲಿ ಮರಗಳ ಬೆಳೆಸುವ ನಿಟ್ಟಿನಲ್ಲಿ ಸಸಿ ನೆಡಲಾಗುವುದು ಎಂದರು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಅಗತ್ಯ ಸಸಿಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ನೀಡುವಂತೆ ಅರಣ್ಯ ಇಲಾಖೆ (ಸಾಮಾಜಿಕ) ಅಧಿಕಾರಿಗಳಿಗೆ ಹೇಳಿದರು.

ಹೆಚ್.ಕೆ.ಆರ್.ಡಿ.ಬಿ ಅನುದಾನದಲ್ಲಿ ಆಗಬೇಕಾದ ಕಾಮಗಾರಿಗಳನ್ನು ನಿಗಧಿತ ಅವಧಿಯಲ್ಲಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು. ಕಳೆದ ವರ್ಷ ಎಸ್.ಎಸ್.ಎಲ್.ಸಿಯಲ್ಲಿ ಜಿಲ್ಲೆ 16 ನೇ ಸ್ಥಾನಗಳಿಸಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ದ್ವಿತೀಯ ಪಿಯುಸಿಯಲ್ಲಿ 30 ನೇ ಸ್ಥಾನದಲ್ಲಿರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಪಿಯುಸಿಯ ಶೈಕ್ಷಣಿಕ ಗುಣಮಟ್ಟತೆಯನ್ನು ಸುಧಾರಿಸಲು ಪೂರಕ ಪಠ್ಯ ಚಟುವಟಿಕೆ ಕೈಗೊಳ್ಳಬೇಕು ಎಂದು ಅವರು ಶಿಕ್ಷಣ ಇಲಾಖೆಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅವಿನಾಶ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಸಂತರಾವ್ ಕುಲಕರ್ಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button