ಜಲಾಶಯ ಭರ್ತಿ: ಕಾಲುವೆಗೆ ನೀರು ಹರಿಸಿ ರೈತರಿಗೆ ಅನುಕೂಲ ಕಲ್ಪಿಸಿ
ಕಾಲುವೆಗೆ ನೀರು ಹರಿಸಲು ಮಾಜಿ ಶಾಸಕ ಶಿರವಾಳ ಆಗ್ರಹ
ಜಲಾಶಯ ಭರ್ತಿ: ಕಾಲುವೆಗೆ ನೀರು ಹರಿಸಿ ರೈತರಿಗೆ ಅನುಕೂಲ ಕಲ್ಪಿಸಿ
ವಿನಯವಾಣಿ ಸಮಾಚಾರ
ಶಹಾಪುರ: ಆಲಮಟ್ಟಿ ಜಲಾಶಯ ಭರ್ತಿಯಾಗಿ ನಾರಾಯಣಪುರ ಜಲಾಶಯಕ್ಕೂ ಸಮರ್ಪಕ ಪ್ರಮಾಣದಲ್ಲಿ ನೀರು ಹರಿದು ಬಂದಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ನಾರಾಯಣಪುರ ಜಲಾಶಯದ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ನೀರು ಹರಿಸಲು ಆದೇಶ ಹೊರಡಿಸಬೇಕೆಂದು ಮಾಜಿ ಶಾಸಕ ಗುರು ಪಾಟೀಲ್ ಶಿರವಾಳ ಒತ್ತಾಯಿಸಿದ್ದಾರೆ.
ಪ್ರಸ್ತುತ ನಾರಾಯಣಪುರ ಜಲಾಶಯದಿಂದ ಜಾನುವಾರುಗಳಿಗೆ ಅನುಕೂಲವಾಗಲೆಂದು ನದಿಗೆ ನೀರು ಹರಿಸಲಾಗುತ್ತಿದೆ. ಅದೇ ರೀತಿ ರೈತರ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗುವಂತೆ ಎಡ ಮತ್ತು ಬಲದಂಡೆ ಕಾಲುವೆಗಳಿಗೂ ನೀರು ಬಿಡುಗಡೆ ಮಾಡುವುದು ಅಗತ್ಯವಿದೆ ಎಂದ ಅವರು, ಸಗರನಾಡು ಸೇರಿದಂತೆ ರಾಯಚೂರ, ಯಾದಗಿರಿ,ಕಲ್ಬುರ್ಗಿ ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಳು ಈಗಾಗಲೇ ಒಣಗುತ್ತಿವೆ. ಇಂತಹ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಹರಿಸಿದರೆ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಲ್ಲದೆ ಕೃಷಿ ಚಟುವಟಿಕೆಗಳಿಗೂ ಹೊಸ ಚೈತನ್ಯ ದೊರೆಯಲಿದೆ. ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆ ಕರೆದು ಬೆಳೆಗಳ ಸಂರಕ್ಷಣೆಗೆ ನೀರು ಹರಿಸಬೇಕು. ಆದಷ್ಟು ಬೇಗ ನೀರಾವರಿ ಸಚಿವರು ಈ ಕುರಿತು ಕ್ರಮಕೈಗೊಳ್ಳಬೇಕು. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡಲ್ಲಿ ರೈತರ ಬೆಳೆಗಳಾದ ಭತ್ತ, ಹತ್ತಿ, ತೊಗರೆ, ಸೇಂಗಾ ಇತರೆ ಬೆಳೆಗಳಿಗೆ ಜೀವ ಕಳೆ ತುಂಬಬಹುದು. ಸಮಯ ಕಳೆದ ಮೇಲೆ ಕಾಲುವೆ ನೀರು ಹರಿಸಿದರೂ ಉಪಯೋಗವಾಗದಿದ್ದರೆ ಪ್ರಯೋಜವೇನು..? ಎಂದು ಪ್ರಶ್ನಿಸಿದ ಅವರು, ತಕ್ಷಣಕ್ಕೆ ನೀರು ಹರಿಸಿ ಆ ನಂತರ ಸಭೆ ಕರೆಯಲುಬಹುದು ಎಂದು ಅವರು ಒತ್ತಾಯಿಸಿದ್ದಾರೆ.




