ಅಲೆಮಾರಿ ಜನಾಂಗ ಅಭಿವೃದ್ಧಿಗೆ ಒತ್ತು
ಅಲೆಮಾರಿ ಜನಾಂಗಗಳ ಅಭಿವೃದ್ಧಿಗಾಗಿ ಶಿಕ್ಷಣ ಹಾಗೂ
ಉದ್ಯಮಶೀಲತೆಗೆ ಒತ್ತು: ಶ್ರೀ ಪ್ರಿಯಾಂಕ್ ಖರ್ಗೆ
ಬೆಂಗಳೂರಃ ಸಮಾಜದಲ್ಲಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಅಲೆಮಾರಿ ಜನಾಂಗಳ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ ಹಾಗೂ ಉದ್ಯಮಶೀಲತೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಅಲೆಮಾರಿ ಜನಾಂಗಗಳ ಪ್ರಗತಿಗೆ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು (ಜ.2) ಏರ್ಪಡಿಸಿದ್ದ ರಾಜ್ಯ ಅಲೆಮಾರಿ ಜನಾಂಗಗಳ ಸಮುದಾಯ ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಸಚಿವರು ಜನಾಂಗದ ಸಮಸ್ಯೆಗಳನ್ನು ಆಲಿಸಿದ ನಂತರ ಮಾತನಾಡಿದರು.
ಅಲೆಮಾರಿ ಜನಾಂಗದ ಸುಮಾರು 200ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಆಶಕ್ತ ಸಮುದಾಯದ ಹಿತದೃಷ್ಟಿಯಿಂದ ಸಮೃದ್ಧಿ, ಉನ್ನತಿ, ಐರಾವತ, ಪ್ರಬುದ್ಧ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದ ಸಚಿವರು, ಅಲೆಮಾರಿ ಸಮುದಾಯದ ಜನಾಂಗದ ನಿವೇಶನರಹಿತರಿಗೆ ನಿವೇಶನಗಳನ್ನು ನೀಡಲು ಅವಶ್ಯವಿದ್ದಲ್ಲಿ ವಿಶೇಷ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು ಎಂದು ಹೇಳಿದರು. ಭೂ ಒಡೆತನ ಕಾರ್ಯಕ್ರಮದಡಿ ಅರ್ಹ ಅಲೆಮಾರಿ ಜನಾಂಗಗಳಿಗೆ ಭೂಮಿ ಕೊಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ತಿಳಿಸಿದರು.
ಅಲೆಮಾರಿ ಜನಾಂಗದ ಕೆಲವು ಜಾತಿಗಳು ಜಾತಿ ದೃಢೀಕರಣ ಪತ್ರ ಪಡೆಯುವಲ್ಲಿ ಆಗಿರಬಹುದಾದ ತೊಂದರೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲೆಮಾರಿ ಜನಾಂಗಗಳಲ್ಲಿ ಮಾತ್ರ ಉಳಿದುಕೊಂಡಿರುವ ಹಲವಾರು ಕಲೆಗಳನ್ನು ಉಳಿಸಿಕೊಳ್ಳುವ ಸಲುವಾಗಿ ಹಾಗು ಅಲೆಮಾರಿ ಜನಾಂಗಗಳ ಅಧ್ಯಯನಕ್ಕಾಗಿ ಬೆಂಗಳೂರು ಸೇರಿದಂತೆ ಅವಶ್ಯವಿರುವ ಜಿಲ್ಲಾ ಕೇಂದ್ರಗಳಲ್ಲಿ ಅಧ್ಯಯನ ಕೇಂದ್ರಗಳನ್ನು ಸ್ಥಾಪಿಸಲು ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವರು ಪ್ರಕಟಿಸಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಕುಮಾರ್ ನಾಯಕ್, ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾದ ಶ್ರೀ ಇ.ವೆಂಕಟಯ್ಯ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶ್ರೀ ಶ್ರೀನಿವಾಸುಲು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಶ್ರೀ ಸಂಗಪ್ಪ ಮತ್ತಿತರ ಅಧಿಕಾರಿಗಳು ಪಾಲ್ಗೊಂಡಿದ್ದರು.