ಈ ನಿಯಮ ಪಾಲಿಸದವರ ಲೈಸೆನ್ಸ್ ರದ್ದು: ಸಿಎಂ ಸಿದ್ದರಾಮಯ್ಯ
(License Cancel) ಇನ್ಮುಂದೆ ಸಂಚಾರ ನಿಯಮ ಪಾಲಿಸದೇ ಇರುವವರಿಗೆ ಚಾಲನಾ ಪರವಾನಗಿಯನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು.
ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರು, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸೂಚನೆ ನೀಡಿದರು. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಕರೆ ಕೊಟ್ಟರು.
ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.
ರಾಜ್ಯಾದ್ಯಂತ ಹೈಟೆಕ್ ಆಂಬುಲೆನ್ಸ್:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವ ರಕ್ಷಕ ಸವಲತ್ತುಗಳಿರುವ ಆಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ ನೂತನ 65 ಆಂಬುಲನ್ಸ್ ಗಳನ್ಮು ಲೋಕಾರ್ಪಣೆ ಮಾಡಿದರು. ಅಪಘಾತದ ಸಂದರ್ಭದಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆಂಬುಲೆನ್ಸ್ ಗಳು ನೆರವಾಗುತ್ತವೆ. ಸದ್ಯ 65 ಆಧುನಿಕ ಮತ್ತು ಪ್ರಾಥಮಿಕ ಆಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.