ಪ್ರಮುಖ ಸುದ್ದಿ
ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತೆ ಲಿಂಗಾಯತ ಧರ್ಮ ದಾಳ ಉರುಳಿಸಿದ್ದೇಕೆ?
ಬೆಂಗಳೂರು: ಲಿಂಗಾಯತ ಧರ್ಮ ಹಿಂದೂ ಧರ್ಮದ ಒಳಗೂ ಇಲ್ಲ, ಹೊರಗೂ ಇಲ್ಲ. ವೈದಿಕ ಧರ್ಮಕ್ಕೆ ಪರ್ಯಾಯವಾದ ಸ್ವತಂತ್ರ ಧರ್ಮ ಎಂಬುದು ನನ್ನ ಒಯಕ್ತಿಕ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ನಗರದ ಗಾಂಧಿ ಭವನದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಅವರ ಕೃತಿ ಲಿಂಗಾಯಿತ ಕನ್ನಡದ ವಚನಧರ್ಮ ಮತ್ತು ವಚನ ಅರಿವಿನ ಬೆರಗು ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಸಿದ್ಧರಾಮಯ್ಯ ಅವರು ಮುಖ್ಯಂತ್ರಿ ಆಗಿದ್ದಾಗ ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ ವಿಚಾರ ದೊಡ್ಡ ವಿವಾದ ಸೃಷ್ಟಿಸಿತ್ತು. ಸಿದ್ಧರಾಮಯ್ಯ ಸರ್ಕಾರ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಇದೀಗ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುವ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತೆ ಲಿಂಗಾಯತ ಸ್ವತಂತ್ರ ಧರ್ಮ ದಾಳ ಉರುಳಿಸಿದ್ದರ ಮರ್ಮವೇನೆಂಬುದು ಚರ್ಚೆಗೆ ಗ್ರಾಸವಾಗಿದೆ.