ಪ್ರಮುಖ ಸುದ್ದಿ

ವಸತಿ ನಿಲಯಗಳಲ್ಲಿ ಉಳಿದು ಮಕ್ಕಳ ಸಮಸ್ಯೆ ಅರಿತುಕೊಳ್ಳಿ

ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಯಾದಗಿರಿಃ ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ಜಿಲ್ಲೆಯ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿರುವ ನೈಜ ಸಮಸ್ಯೆಗಳನ್ನು ಅರಿಯಲು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು ಒಂದು ರಾತ್ರಿ ವಸತಿಶಾಲೆ, ವಸತಿ ನಿಲಯಗಳಲ್ಲಿ ಉಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೊಪ್ಪಳ ಜಿಲ್ಲೆಯ ವಸತಿನಿಲಯದಲ್ಲಿ ಇತ್ತೀಚೆಗೆ ವಿದ್ಯುತ್ ಅವಘಡದಿಂದ ಐವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಹಿನ್ನಲೆಯಲ್ಲಿ ಯಾದಗಿರಿ ಜಿಲ್ಲೆಯ ವಸತಿ ಶಾಲೆಗಳು ಮತ್ತು ವಸತಿ ನಿಲಯಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪ್ರಾಂಶುಪಾಲರು ಹಾಗೂ ಮೇಲ್ವಿಚಾರಕರಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಬಾಲಕರ ವಸತಿನಿಲಯಗಳಲ್ಲಿ ಪುರುಷ ಅಧಿಕಾರಿಗಳು ಮತ್ತು ಬಾಲಕಿಯರ ವಸತಿನಿಲಯಗಳಲ್ಲಿ ಮಹಿಳಾ ಅಧಿಕಾರಿಗಳು ಒಂದು ರಾತ್ರಿ ಮಕ್ಕಳೊಂದಿಗೆ 15 ದಿನದೊಳಗೆ ವಾಸ ಮಾಡಿ ವರದಿ ನೀಡಬೇಕು.

ಮಕ್ಕಳೊಂದಿಗೆ ಮುಕ್ತವಾಗಿ ಚರ್ಚಿಸಿ, ಅವರ ಸಮಸ್ಯೆಗಳನ್ನು ಆಲಿಸಬೇಕು. ಆ ಸಂದರ್ಭದಲ್ಲಿ ಪ್ರಾಂಶುಪಾಲರು, ನಿಲಯ ಮೇಲ್ವಿಚಾರಕರು ಇರದಿದ್ದರೆ ಮಕ್ಕಳು ಮುಕ್ತವಾಗಿ ಸಂಭಾಷಣೆ ನಡೆಸುತ್ತಾರೆ ಎಂದು ಅವರು ಸಲಹೆ ನೀಡಿದರು.

ನೋಡಲ್ ಅಧಿಕಾರಿಗಳು ತಮಗೆ ಸಂಬಂಧಿಸಿದ ವಸತಿ ಶಾಲೆ ಅಥವಾ ವಿದ್ಯಾರ್ಥಿನಿಲಯಗಳ ಸಂಪೂರ್ಣ ಪ್ರಗತಿಯ ಹೊಣೆ ಹೊಂದಿದ್ದು, ಅವುಗಳನ್ನು ಮಾದರಿ ಶಾಲೆ/ ಮಾದರಿ ವಿದ್ಯಾರ್ಥಿ ನಿಲಯಗಳನ್ನಾಗಿ ಮಾಡುವ ಜವಾಬ್ದಾರಿ ಇರುತ್ತದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಒದಗಿಸಿ.

ನೀರು ಶುದ್ಧಿಕರಣ ಘಟಕ, ಸೋಲಾರ್, ಜನರೇಟರ್, ಕಂಪ್ಯೂಟರ್, ಶೌಚಾಲಯ, ಕ್ರೀಡಾ ಸಾಮಗ್ರಿ ಸೇರಿದಂತೆ ಇನ್ನಿತರ ಮೂಲಭೂತ ಸೌಲಭ್ಯಗಳು ಸರ್ವಕಾಲಕ್ಕೂ ಬಳಸುವಂತಿರಬೇಕು ಎಂದು ಅವರು ನಿರ್ದೇಶಿಸಿದರು.
ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳಲ್ಲಿನ ವಿದ್ಯಾರ್ಥಿಗಳು ಯಾವುದೇ ರೀತಿಯ ಅವಘಡಗಳಿಗೆ ಒಳಗಾಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

ವಸತಿ ಶಾಲೆ ಅಥವಾ ವಸತಿನಿಲಯಗಳ ಮೇಲೆ ವಿದ್ಯುತ್ ತಂತಿಗಳು ಹಾದುಹೋಗಿದ್ದರೆ ತಕ್ಷಣ ಸ್ಥಳಾಂತರಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಅವರು ಸೂಚಿಸಿದರು. ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾ 24*7 ಕಾರ್ಯನಿರ್ವಹಿಸುತ್ತಿರಬೇಕು. ಕಾವಲುಗಾರರು ಜಾಗೃತರಾಗಿರಬೇಕು. ಯಾವುದೇ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಲಿಖಿತ ಅನುಮತಿ ಇಲ್ಲದೆ ಹೊರಹೋಗುವಂತಿಲ್ಲ.

ರಜೆಯನ್ನು ಸಹ ಸಕಾರಣದೊಂದಿಗೆ ಲಿಖಿತವಾಗಿ ಪಡೆದು ಸಂಬಂಧಿಸಿದ ಪಾಲಕರ ಜೊತೆಗೆ ಹೋಗತಕ್ಕದ್ದು. ಇನ್ನು ಸ್ನಾನಗೃಹ, ಶೌಚಾಲಯಗಳನ್ನು ಸೂಕ್ತವಾಗಿ ಬಳಕೆ ಮಾಡಬೇಕು. ಯಾವುದೇ ಕಾರಣಕ್ಕೂ ಸ್ನಾನಗೃಹ, ಶೌಚಾಲಯಗಳನ್ನು ಬಳಸದೇ ಇರುವ ವಿಷಯ ಗಮನಕ್ಕೆ ಬಂದರೆ ಸಂಬಂಧಪಟ್ಟ ವಾರ್ಡನ್, ಪ್ರಾಂಶುಪಾಲರು, ತಾಲ್ಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳು ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಶೇ.100ರಷ್ಟು ಸಾಧನೆ ಮಾಡಲು ಪ್ರಾಂಶುಪಾಲರು, ಮೇಲ್ವಿಚಾರಕರು ಶ್ರಮಿಸಬೇಕು. ವಿಷಯ ಶಿಕ್ಷಕರಿಂದ ಗೌರವ ಧನ ನೀಡಿ ಬೋಧನೆ ಮಾಡಿಸಬೇಕು ಎಂದು ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮಾತನಾಡಿ, ನೋಡಲ್ ಅಧಿಕಾರಿಗಳು ಎಲ್ಲಾ ಇಲಾಖೆಯ ವಸತಿ ಶಾಲೆ, ವಿದ್ಯಾರ್ಥಿನಿಲಯಗಳನ್ನು ತಪಾಸಣೆ ಮಾಡಬೇಕು. ವಸತಿ ಶಾಲೆ/ ವಿದ್ಯಾರ್ಥಿನಿಲಯಗಳಲ್ಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಮಾರ್ಗೋಪಾಯಗಳನ್ನು ಕಂಡುಹಿಡಿದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿ ಅನುಷ್ಠಾನಕ್ಕೆ ತರಬೇಕು ಎಂದು ಸೂಚಿಸಿದರು.

ವಸತಿ ಶಾಲೆ ಅಥವಾ ವಿದ್ಯಾರ್ಥಿನಿಲಯಗಳ ನಿರ್ವಹಣೆಯಲ್ಲಿ ಲೋಪವೆಸಗುವ ಯಾವುದೇ ಅಧಿಕಾರಿ, ಸಿಬ್ಬಂದಿ ವರ್ಗದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು. ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸುನೀಲ್ ಬಿಸ್ವಾಸ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಎಂ.ಎಸ್.ಅಲ್ಲಾಬಕಷ ಅವರು ಉಪಸ್ಥಿತರಿದ್ದರು.

ಜಿಲ್ಲಾ ಪಂಚಾಯಿತಿಯ ಸಹಾಯಕ ಕಾರ್ಯದರ್ಶಿ ಅಜೀತ್ ಜಿ.ನಾಯಕ, ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಬಂದೇನವಾಜ್ ಗೇಸುದರಾಜ್, ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ಪೂರ್ಣಿಮಾ ಚೂರಿ ಸೇರಿದಂತೆ ಜೆಸ್ಕಾಂ ಅಧಿಕಾರಿಗಳು, ವಸತಿನಿಲಯಗಳ ನೋಡಲ್ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ವಸತಿ ನಿಲಯಗಳ ಮೇಲ್ವಿಚಾರಕರು, ವಸತಿಶಾಲೆಗಳ ಪ್ರಾಂಶುಪಾಲರು ಸಭೆಯಲ್ಲಿ ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button