ವಿಶ್ವ ಜನಸಂಖ್ಯಾ ದಿನಾಚರಣೆ- ಡಿಸಿ ಮಂಜುನಾಥ ಸಲಹೆ
ಸುಖ ಸಂಸಾರಕ್ಕೆ ಸಾಕು ಎರಡು ಮಕ್ಕಳು
ಯಾದಗಿರಿಃ ಸುಖದಿಂದ ಸಂಸಾರ ನಡೆಸಲು ಎರಡು ಮಕ್ಕಳು ಸಾಕು. ಇದರಿಂದ ಗುಣಮಟ್ಟದ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ ಕೊಡಲು ಸಾಧ್ಯವಾಗುತ್ತದೆ. ಜೊತೆಗೆ ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಶ್ರೀ ಮಂಜುನಾಥ್ ಜೆ. ಅವರು ಹೇಳಿದರು.
ನಗರದ ಮೆಥೋಡಿಸ್ಟ್ ಚರ್ಚ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹೆಚ್ಚುತ್ತಿರುವ ಜನಸಂಖ್ಯೆಯಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ, ಅರಿವು ಮೂಡಿಸಲು ವಿಶ್ವ ಜನಸಂಖ್ಯಾ ದಿನ ಆಚರಿಸಲಾಗುತ್ತಿದೆ. “ಸಾರ್ಥಕತೆಯ ನಾಳೆಯ ಜೀವನಕ್ಕಾಗಿ ಕುಟುಂಬ ಯೋಜನೆಗಳ ಬಳಕೆ” ಎಂಬುದು ಈ ಸಲದ ದಿನಾಚರಣೆಯ ಘೋಷಣೆಯಾಗಿದೆÉ ಎಂದು ಅವರು ತಿಳಿಸಿದರು.
1960ರಲ್ಲಿ ವಿಶ್ವದ ಜನಸಂಖ್ಯೆ 300 ಕೋಟಿ ಇತ್ತು. 2000ರಲ್ಲಿ 600 ಕೋಟಿಗೆ ಹೆಚ್ಚಿತು. ಪ್ರಸ್ತುತ 760 ಕೋಟಿಗೂ ಅಧಿಕವಾಗಿದೆ. ಜಗತ್ತಿನಲ್ಲಿ ಪ್ರತಿ ಸೆಕೆಂಡಿಗೆ 4 ಮಗು ಜನಿಸುತ್ತವೆ. 1.8 ಜನ ಮರಣ ಹೊಂದುತ್ತಾರೆ. ಭಾರತದ ಜನಸಂಖ್ಯೆ ಈಗಾಗಲೇ 135 ಕೋಟಿ ದಾಟಿದೆ. 2025ರ ಹೊತ್ತಿಗೆ ಪ್ರಪಂಚದಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ಚೀನಾ ದೇಶವನ್ನೂ ಹಿಂದಿಕ್ಕಲಿದೆ.
ಅಲ್ಲದೇ, ಗ್ರಾಮೀಣ ಭಾಗದಲ್ಲಿ ವಾಸ ಮಾಡುವವರ ಸಂಖ್ಯೆಯೂ ದಿನದಿಂದ ದಿನಕ್ಕೆ ಕ್ಷಿಣಿಸುತ್ತಿದೆ. 2050ರೊಳಗೆ ಶೇ.70ರಷ್ಟು ಜನ ನಗರವಾಸಿಗಳಾಗುತ್ತಾರೆ ಎಂದು ಅವರು ವಿವರಿಸಿದರು.
1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರಸ್ತೆ, ರೈಲು, ವಿಮಾನಯಾನ, ವಾಣಿಜ್ಯ, ಶಿಕ್ಷಣ, ವ್ಯಾಪಾರ, ಆರೋಗ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮುಂದುವರೆದಿದ್ದೇವೆ. ಅಕ್ಷರ ಜ್ಞಾನ ಪಡೆಯುವವರ ಸಂಖ್ಯೆಯೂ ಹೆಚ್ಚಿದೆ. ಇದರ ಜೊತೆಗೆ ಜನಸಂಖ್ಯೆಯೂ ಹೆಚ್ಚಾಗಿದೆ. ರಾಜ್ಯದ ಟೋಟಲ್ ಫರ್ಟಿಲಿಟಿ ರೇಟ್ (ಟಿಎಫ್ಆರ್) ಶೇ.1.8ರಷ್ಟು ಇದೆ. ಆದರೆ, ಜಿಲ್ಲೆಯ ಟಿಎಫ್ಆರ್ ಶೇ.3.1ರಷ್ಟಿದೆ. ಇದು ಕಡಿಮೆಯಾಗಲು ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಿಗೆ ಸಾರ್ವಜನಿಕರು ಸ್ಪಂದಿಸಬೇಕು. ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.
ಕೇಂದ್ರ ಸರಕಾರವು ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ಮಾನದಂಡಗಳನ್ನು ಇಟ್ಟುಕೊಂಡು ದೇಶದ ಹಿಂದುಳಿದ 115 ಜಿಲ್ಲೆಗಳನ್ನು ಮಹತ್ವಾಕಾಂಕ್ಷೆ ಜಿಲ್ಲೆಗಳೆಂದು ಗುರುತಿಸಿದೆ. ಇವುಗಳಲ್ಲಿ ರಾಜ್ಯದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳು ಆಯ್ಕೆಯಾಗಿವೆ. ಇದರಿಂದ ಜಿಲ್ಲೆಯಲ್ಲಿ ಹಲವು ಯೋಜನೆಗಳು ಅನುಷ್ಠಾನಗೊಂಡು ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಅವರು ಆಶಿಸಿದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಲಕ್ಷ್ಮೀಕಾಂತ ಅವರು ಮಾತನಾಡಿ, ಜನಸಂಖ್ಯೆ ಹೆಚ್ಚಳದಿಂದ ಕಾಯಿಲೆಗಳೂ ಹುಟ್ಟಿಕೊಳ್ಳುತ್ತವೆ. ಸರಕಾರ ಜನಸಂಖ್ಯೆ ನಿಯಂತ್ರಣಕ್ಕೆ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಭಗವಂತ ಅನವಾರ ಅವರು ಮಾತನಾಡಿ, ದೇಶದ ಅಭಿವೃದ್ಧಿಗೆ ಜನ ಬೇಕು. ಆದರೆ, ಮಿತಿಮೀರಿದ ಜನಸಂಖ್ಯೆ ಅಭಿವೃದ್ಧಿಗೆ ಮಾರಕವಾಗುತ್ತದೆ. ಸಮಸ್ಯೆಗಳು ಹೆಚ್ಚುತ್ತಾ ಹೋಗುತ್ತವೆ. ಆದ್ದರಿಂದ ಚಿಕ್ಕ ಸಂಸಾರ ಇದ್ದಷ್ಟು ಉತ್ತಮ ಜೀವನ ನಡೆಸಬಹುದು. ಮದುವೆಯಾಗಲು ಗಂಡಿಗೆ 21 ವರ್ಷ, ಹೆಣ್ಣಿಗೆ 18 ತುಂಬಿರಬೇಕು. ಮಕ್ಕಳ ಜನನದ ಅಂತರ 3-4 ವರ್ಷ ಇರಬೇಕು ಎಂದು ಸಲಹೆ ನೀಡಿದರು.
ಆಶಾ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಬರುವ ಏರಿಯಾಗಳಲ್ಲಿನ ಜನರ ವಯಸ್ಸಿನ ಬಗ್ಗೆ ಸಂಪೂರ್ಣ ಮಾಹಿತಿ ಕಲೆ ಹಾಕಬೇಕು.
ವಯಸ್ಸಿಗೆ ತಕ್ಕಂತೆ ಅವರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಲು ಶ್ರಮಿಸಬೇಕು. ಇನ್ನು ಜನಸಂಖ್ಯೆ ನಿಯಂತ್ರಣದಲ್ಲಿ ಆಶಾ ಕಾರ್ಯಕರ್ತೆಯರದ್ದು ಪ್ರಮುಖ ಪಾತ್ರ ಇದ್ದು, ಎರಡು ಮಕ್ಕಳ ನಂತರ ಶಸ್ತ್ರಚಿಕಿತ್ಸೆಗೆ ದಂಪತಿಯ ಮನವೊಲಿಸಬೇಕು. ಪುರುಷರಿಗೆ ಸಂತಾನ ಶಕ್ತಿ ಹರಣ ಚಿಕಿತ್ಸೆ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದು ಅವರು ಸೂಚಿಸಿದರು.
ವಿದ್ಯಾರ್ಥಿನಿ ಮಹೇಶ್ವರಿ ಪ್ರಾರ್ಥನೆ ಗೀತೆ ಹಾಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಎಸ್.ಬಿ.ಪಾಟೀಲ್ ಅವರು ಸ್ವಾಗತಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಂಕರ ಬಿರಾದಾರ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಆರೋಗ್ಯ ಸಹಾಯಕರಾದ ಮಹಿಪಾಲರೆಡ್ಡಿ ಅವರು ವಂದನಾರ್ಪಣೆ ಮಾಡಿದರು.
ಜಾಗೃತಿ ಜಾಥಾ: ಕಾರ್ಯಕ್ರಮಕ್ಕೂ ಮೊದಲು ನಗರದ ಹಳೆ ಬಸ್ ನಿಲ್ದಾಣದ ಹತ್ತಿರವಿರುವ ಪ್ರವಾಸಿ ಮಂದಿರದಿಂದ ಮೆಥೋಡಿಸ್ಟ್ ಚರ್ಚ್ವರೆಗೆ ಜಾಗೃತಿ ಜಾಥಾ ನಡೆಯಿತು. ಸ್ಟೇಷನ್ ಬಜಾರ್ ಸರಕಾರಿ ಪ್ರೌಢಶಾಲೆಯ ಮಕ್ಕಳು ಜನಸಂಖ್ಯೆ ನಿಯಂತ್ರಣದ ಬಗ್ಗೆ ಘೋಷಣೆಗಳನ್ನು ಕೂಗಿ ಗಮನ ಸೆಳೆದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರು ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ್, ಫಾರ್ಮಾಸಿಸ್ಟ್ ಮಲ್ಲಿಕಾರ್ಜುನ, ಸ್ಟೇಷನ್ ಬಜಾರ್ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಿಶ್ವನಾಥ ಕಡ್ಡಿ, ಶಿಕ್ಷಕ ಶಿವಾನಂದ ಹಾಗೂ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.