ಬೆಂಗಳೂರಿನ ಬಿಜೆಪಿ ಕಚೇರಿ ಎದುರು ಮಹದಾಯಿ ಹೋರಾಟಗಾರರು?
ಬೆಂಗಳೂರು: ರೈತ ಮುಖಂಡ ವಿರೇಶ್ ಸಬರದಮಠ ನೇತೃತ್ವದಲ್ಲಿ ಸುಮಾರು ಐನೂರು ಜನ ಮಹದಾಯಿ ಹೋರಾಟಗಾರರು ಇಂದು ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ್ದಾರೆ. ಮಾಜಿ ಸಿಎಂ, ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಶೀಘ್ರ ಮಹಾದಾಯಿ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಲು ಹೋರಾಟಗಾರರು ಮುಂದಾಗಿದ್ದಾರೆ. ನರಗುಂದದಲ್ಲಿ ಬಿಜೆಪಿಯಿಂದ ನಡೆದ ಪರಿವರ್ತನಾ ಯಾತ್ರೆ ವೇಳೆ ಬಿಎಸ್ ವೈ ಮಹದಾಯಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಹೀಗಾಗಿ, ಬಿಎಸ್ ವೈ ಭೇಟಿಗೆ ಬಂದಿದ್ದೇವೆ ಎಂದು ಹೋರಾಟಗಾರರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಹೋರಾಟಗಾರ ವಿರೇಶ ಸೊಬರದಮಠ ಅವರು ಮಹದಾಯಿ ಹೋರಾಟಗಾರರು ಯಾವ ಪಕ್ಷದ ಪರವೂ ಇಲ್ಲ, ವಿರೋಧವೂ ಇಲ್ಲ. ಈವರೆಗೆ ಎಲ್ಲರೂ ಮಹದಾಯಿ ಸಮಸ್ಯೆ ಬಗೆಹರಿಸುವುದಾಗಿ ಹೇಳುತ್ತ ಬಂದಿದ್ದಾರೆ. ಆದರೆ, ಇಷ್ಟೆಲ್ಲಾ ಹೋರಾಟ ನಡೆದರೂ ಇನ್ನೂ ಸಮಸ್ಯೆ ಇತ್ಯರ್ಥಗೊಂಡಿಲ್ಲ. ಮಾಜಿ ಸಿಎಂ, ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಂದ ಸಮಸ್ಯೆ ಬಗೆಹರಿಯಲು ಸಾಧ್ಯ ಎಂಬ ಭರವಸೆ ಇದೆ. ಹೀಗಾಗಿ, ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಬಂದಿದ್ದೇವೆ. ಯಡಿಯೂರಪ್ಪ ಅವರನ್ನು ಭೇಟಿ ಮಾಡುವವರೆಗೂ ಇಲ್ಲೇ ಧರಣಿ ಕೂಡುತ್ತೇವೆ ಎಂದು ಸಬರದಮಠ ತಿಳಿಸಿದ್ದಾರೆ.