ಜೀವನದಲ್ಲಿ ಸಾಧಿಸುವ ಛಲವಿರಬೇಕು : ಪ್ರಕಾಶ್ ರಜಪೂತ್
ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಅಗತ್ಯ- ರಜಪೂತ್
ಯಾದಗಿರಿ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ತಾಳ್ಮೆಯನ್ನು ಬೆಳೆಸಿಕೊಳ್ಳುವ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಯಾದಗಿರಿ ಜಿಲ್ಲೆಯ ಅಪಾರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ತಿಳಿಸಿದರು.
ನಗರದ ವಾಲ್ಮೀಕಿ ಭವನದಲ್ಲಿ ಎ 1 ಕೆಎಎಸ್ ಕರಿಯರ್ ಅಕಾಡೆಮಿ ಯ ಪ್ರಥಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವಿದ್ಯಾರ್ಥಿಯು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮುಖಾಂತರ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕರ್ನಾಟಕ ಆಡಳಿತ ಸೇವೆಯಲ್ಲಿ ಕಾರ್ಯನಿರ್ವಹಿಸ ಬೇಕಾದರೆ ವಿದ್ಯಾರ್ಥಿಗಳು ತಾಳ್ಮೆಯಿಂದ, ಏಕಾಗ್ರತೆಯಿಂದ ವ್ಯಾಸಂಗ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಹಿಂದೆ ಗುರು ಇರಬೇಕು , ಮುಂದೆ ಗುರಿ ಇರಬೇಕು ಎನ್ನುವ ಗಾದೆಯ ವಾಡಿಕೆಯಂತೆ ವಿದ್ಯಾರ್ಥಿಗಳು ಸಾಧಿಸುವ ಛಲ ದೊಂದಿಗೆ ಮುನ್ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಇತಿಹಾಸ ವಿಭಾಗದ ಪ್ರೊಫೆಸರ್ ಡಾ. ಸರ್ವೋದಯ ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಓದುವಂತಹ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಜೀವನದಲ್ಲಿ ಸಮಯಕ್ಕೆ ಗೌರವ ನೀಡಿದರೆ ಸಮಯ ಒಂದಲ್ಲ ಒಂದು ದಿನ ನಿಮಗೆ ಗೌರವ ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆಸಲ್ಲಿಸಿದ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಶರಣಗೌಡ , ರಾಜಪ್ಪ ಕೊನಿಮನಿ, ರಘುನಾಥ್ ರೆಡ್ಡಿ ಹಾಗೂ ಜವಹಾರ್ ಶಿಕ್ಷಣ ಸಂಸ್ಥೆಯ ಬಿಎಡ್ ಕಾಲೇಜಿನ ಪ್ರಾಚಾರ್ಯರಾದ ಇಕ್ಬಾಲ್ ಅವರಿಗೆ ಸಂಸ್ಥೆಯ ವತಿಯಿಂದ ಎ1 ಪ್ರತಿಭಾ ಪುರಸ್ಕಾರ ಸನ್ಮಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಎ 1 ಕೆಎಎಸ್ ಕರಿಯರ್ ಅಕಾಡೆಮಿಯ ಪ್ರಥಮ ವರ್ಷದ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.