ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ 14 ದಿನಗಳ ನ್ಯಾಯಾಂಗ ಬಂಧನ ಇಂದು ಅಂತ್ಯ

ಬೆಂಗಳೂರು: ರೇಣುಕಾಸ್ವಾಮಿ ಸಾವಿನ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ನಟ ದರ್ಶನ್ ಅವರ 14 ದಿನಗಳ ನ್ಯಾಯಾಂಗ ಬಂಧನ ಗುರುವಾರಕ್ಕೆ ಅಂತ್ಯವಾಗುತ್ತಿದೆ. ಇಂದು ಅವರ ಜಾಮೀನು ಅರ್ಜಿಯನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸುವ ಸಾಧ್ಯತೆಯಿದ್ದು, ಜಾಮೀನು ಸಿಗುತ್ತಾ ಅಥವಾ ಕಾರಾಗೃಹ ವಾಸ ಮುಂದುವರಿಯುತ್ತಾ ಎಂದು ಅಭಿಮಾನಿಗಳು ಕಾತರರಾಗಿದ್ದಾರೆ.
ಇಂದು ವಿಡಿಯೊ ಕಾನ್ಫರೆನ್ಸ್ ವಿಚಾರಣೆ: ನ್ಯಾಯಾಂಗ ಕಸ್ಟಡಿ ಅಂತ್ಯವಾಗುವ ಕಾರಣ ವಿಡಿಯೊ ಕಾನ್ಫರೆನ್ಸ್ ಮೂಲಕ ಇಂದು ನ್ಯಾಯಾಧೀಶರು ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳನ್ನು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಅದಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ದರ್ಶನ್ ಅವರನ್ನು ವಿಚಾರಣೆಗೆ ಕರೆದಾಗ ಹೊರಗೆ ಮಾಧ್ಯಮ ಪ್ರತಿನಿಧಿಗಳು, ಅಭಿಮಾನಿಗಳು ಜಮಾಯಿಸುತ್ತಾರೆ, ಇದರಿಂದ ತೊಂದರೆಯಾಗುತ್ತದೆ ಎಂದು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳನ್ನು ಜೂನ್ 11ರಂದು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ಜೂನ್ 22ರಂದು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.