ಪ್ರಮುಖ ಸುದ್ದಿ

ಲೈಂಗಿಕ ದೌರ್ಜನ್ಯ ತಡೆಗೆ ಪೋಕ್ಸೊ ಕಾಯ್ದೆ ಬಳಕೆಯಾಗಲಿ -ನ್ಯಾ.ಶಿವನಗೌಡ

ಸರ್ವರಲ್ಲಿ ಕಾನೂನು ಸಾಮಾನ್ಯ ಜ್ಞಾನ ಅಗತ್ಯ

ಯಾದಗಿರಿಃ ದೇಶದಲ್ಲಿ 14 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಅಪರಾಧ ಪ್ರಕರಣಗಳ ನಿಯಂತ್ರಣಕ್ಕಾಗಿ ಜಾಮೀನು ರಹಿತ ಪ್ರಕರಣ ದಾಖಲಿಸಲು ಪೋಕ್ಸೊ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಗೌರವಾನ್ವಿತ  ಶಿವನಗೌಡ ಅವರು ಹೇಳಿದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸೃಷ್ಟಿ ಚಾರಿಟೇಬಲ್ ಟ್ರಸ್ಟ್, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ನಾಲ್ಸಾ ಸ್ಕೀಮ್-2015 ಕುರಿತು ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೋಂದ ಬಾಲಕಿಯ ಹೇಳಿಕೆಯನ್ನು ಗೌಪ್ಯವಾಗಿಟ್ಟು, ನ್ಯಾಯಾಲಯದ ಬಾಗಿಲು ಬಂದ್ ಮಾಡಿ ವಿಚಾರಣೆ ನಡೆಸಲಾಗುತ್ತದೆ. ಸಹನೆ, ತಾಳ್ಮೆಯ ಮನೋಭಾವನೆಯೇ ಮಹಿಳೆ, ಮಕ್ಕಳು ಹಾಗೂ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯದಂತಹ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳೆಯರನ್ನು ಅಪಹರಣ ಮಾಡಿ ವೇಶ್ಯಾವಾಟಿಕೆ ದಂಧೆಗೆ ನೂಕುವುದು, ಲೈಂಗಿಕ ಶೋಷಣೆ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿಸಿದರು.

ವಯಸ್ಕರಾಗಿರುವ ಯುವತಿಯರು, ವಿದ್ಯಾರ್ಥಿಗಳು ಕಾನೂನುಗಳ ಬಗ್ಗೆ ತಿಳಿದುಕೊಳ್ಳುವುದು ಅವಶ್ಯಕವಾಗಿದೆ. ಪ್ರತಿಯೊಬ್ಬರು ಕಾನೂನುಗಳ ಸದುಪಯೋಗ ಮಾಡಿಕೊಳ್ಳಬೇಕು. ಇದರಿಂದ ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ. ಲೈಂಗಿಕ ದೌರ್ಜನ್ಯ ತಡೆಯುವ ಬಗ್ಗೆ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕುಗಳಲ್ಲಿರುವ ಕಾನೂನು ಸೇವೆಗಳ ಪ್ರಾಧಿಕಾರಗಳು ಸಾಮಾನ್ಯ ಜನರಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಸುತ್ತಿವೆ. ಸಾರ್ವಜನಿಕರು ಕಾನೂನು ತಿಳಿದು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ವಕೀಲರಾದ ಆರ್.ಎಸ್.ಪಾಟೀಲ್ ಅವರು ಮಾತನಾಡಿ, ವ್ಯಕ್ತಿಗೆ ಕಾನೂನು ಅರಿವು ಮುಖ್ಯವಾಗಿದೆ. ಮನುಷ್ಯ ಹುಟ್ಟಿನಿಂದ ಸಾವಿನ ವರೆಗೂ ಕಾನೂನು ಅನ್ವಯಿಸುತ್ತದೆ. ಹೀಗಾಗಿ ದಿನನಿತ್ಯದ ಜೀವನಕ್ಕೆ ಬೇಕಾಗಿರುವ ಕಾನೂನಿನ ಸವಲತ್ತು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಸಮಾಜಘಾತುಕ ಶಕ್ತಿಗಳಿಂದ ಮಹಿಳೆ, ಮಕ್ಕಳು ಹಾಗೂ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿವೆ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ ಅರ್ಜುನ ಬನಸೊಡೆ, ಪ್ರಾಂಶುಪಾಲರಾದ ಡಾ.ಶ್ರೀನಿವಾಸರಾವ್, ಕರ್ನಾಟಕ ರಾಜ್ಯ ಕಾನೂ ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್.ಮಾಲಿಪಾಟೀಲ್, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಗಳಾದ ವಿನಯಕುಮಾರ ಕುಲಕರ್ಣಿ ಹಾಗೂ ಸೃಷ್ಟಿ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಬೀರೇಶ ಚಿರತೆನೋರ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಅನಿತಾ ಪ್ರಾರ್ಥನಾ ಗೀತೆ ಹಾಡಿದರು. ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಹರೀಶ ರಾಥೋಡ ಅವರು ಕಾರ್ಯಕ್ರಮ ನಿರೂಪಿಸಿದರು. ಮಲ್ಲಿಕಾರ್ಜುನ ಹೊರಟೂರು ಅವರು ವಂದಿಸಿದರು.

Related Articles

Leave a Reply

Your email address will not be published. Required fields are marked *

Back to top button