ಕ್ಷಯರೋಗ ನಿಯಂತ್ರಣಕ್ಕೆ ಖಾಸಗಿ ವೈದ್ಯರ ಸಹಕಾರ ಅಗತ್ಯ-ಡಿಸಿ ಮಂಜುನಾಥ
ಕ್ಷಯರೋಗ ನಿಯಂತ್ರಿಸಲು ಹಲವು ಕ್ರಮ
ಯಾದಗಿರಿಃ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣ ಮಾಡುವಲ್ಲಿ ಖಾಸಗಿ ವೈದ್ಯರ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕ್ಷಯ ರೋಗ ನಿಯಂತ್ರಣದಲ್ಲಿ ಖಾಸಗಿ ವಲಯದ ಪಾಲುದಾರಿಕೆಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಕ್ಷಯ ರೋಗಿಗಳ ಬಗ್ಗೆ ಮತ್ತು ಮೆಡಿಕಲ್ಗಳಲ್ಲಿ ಔಷಧಿ ತೆಗೆದುಕೊಳ್ಳುವ ರೋಗಿಗಳ ಬಗ್ಗೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಅಲ್ಲದೇ, ಸರಕಾರದಿಂದ ಉಚಿತವಾಗಿ ದೊರೆಯುವ ಗುಳಿಗೆಗಳನ್ನು ಖಾಸಗಿ ಮೆಡಿಕಲ್ಗಳಲ್ಲಿ ಉಚಿತವಾಗಿ ನೀಡಿದರೆ ಮೆಡಿಕಲ್ಗಳಿಗೆ ಗೌರವಧನ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಕ್ಷಯ ರೋಗಿಗಳು 6 ತಿಂಗಳವರೆಗೆ ಔಷಧಿ ತೆಗೆದುಕೊಳ್ಳುವಂತೆ ನೋಡಿಕೊಳ್ಳುವ ಆಶಾ ಕಾರ್ಯಕರ್ತೆಯರಿಗೆ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ರೂ.1,000 ಗೌರವಧನವನ್ನು ಕೊಡಲಾಗುತ್ತದೆ. ಅದೇ ರೀತಿ 8 ತಿಂಗಳ ಕೋರ್ಸ್ಗೆ ರೂ.1,500, 2 ವರ್ಷದ ಕೋರ್ಸ್ಗೆ ರೂ.5,000 ಗೌರವಧನ ನೀಡಲಾಗುವುದು ಎಂದು ಅವರು ತಿಳಿಸಿದರು.
ಕ್ಷಯ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ದೊರೆಯುವ ಚಿಕಿತ್ಸೆ ಮತ್ತು ಔಷಧಿ ಬಗ್ಗೆ ತಿಳಿಸಬೇಕು. ಆರೋಗ್ಯ ಪರೀಕ್ಷೆಗಳಿಂದ ದೂರ ಉಳಿದ ರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗುರುರಾಜ ಹಿರೇಗೌಡ್ರು, ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಲಕ್ಷ್ಮೀಕಾಂತ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ವಿವೇಕಾನಂದ ಟೇಂಗೆ, ತಾಲ್ಲೂಕು ಆರೋಗ್ಯ ಅಧಿಕಾರಿ ಮಲ್ಲಪ್ಪ, ಖಾಸಗಿ ವೈದ್ಯರು ಹಾಗೂ ಔಷಧಿ ವ್ಯಾಪಾರಿಗಳ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.